ವಾಲ್ಮೀಕಿ ಜಯಂತಿ-ಮೀಲಾದ್ದುನ್ನಬಿ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ವಾಲ್ಮೀಕಿ ಜಯಂತಿ-ಮೀಲಾದ್ದುನ್ನಬಿ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು: ಕೋವಿಡ್ ಸೋಂಕು ಹರಡುವ ಹಿನ್ನೆಲೆ ಪ್ರಸ್ತುತ ಸಾಲಿನ ಮೀಲಾದ್ದುನ್ನಬಿ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

 

ವಾಲ್ಮೀಕಿ ಜಯಂತಿ ಹಾಗೂ ಮೀಲಾದ್ದುನ್ನಬಿ ಹಬ್ಬವನ್ನು ಸರಳವಾಗಿ ಆಚರಿಸಲು ಸೂಚಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ರಾಜ್ಯ ಸರಕಾರ, ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ. ಸುರಕ್ಷಿತ ಅಂತರ ಕಡ್ಡಾಯವಾಗಿ ಪಾಲಿಸಬೇಕು, ಮುಖಗವಸು ಧರಿಸಬೇಕು, ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು ಎಂದು ಉಲ್ಲೇಖಿಸಲಾಗಿದೆ.

 

ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚು ಜನರು ಆಗಮಿಸುವಂತಿಲ್ಲ, ಸ್ಯಾನಿಟೈಜರ್ ಬಳಸಬೇಕು. ಮಸೀದಿಗಳಲ್ಲಿ ಕನಿಷ್ಠ 6 ಅಡಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು. ಹಬ್ಬದ ಸಂದರ್ಭದಲ್ಲಿ ಶಾಂತಿ-ಸೌಹಾರ್ದತೆಗೆ ಪೂರಕವಾಗಿ ಆಚರಣೆ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕಾಪಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

 

ಮಸೀದಿ ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

 

ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!