ಮೈಸೂರಿಗೆ ಕೊಟ್ಟಂತೆ ಬೀದರ್ ಗೂ ಫಿಲಂ ಸಿಟಿ ಕೊಡಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

 

 

 

ಬೆಂಗಳೂರು: ದೇಶದ ಅನೇಕ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸಿ ತಾಣಗಳನ್ನು ನಿರ್ಮಿಸಿ ಪ್ರವಾಸೋಧ್ಯಮ ಇಲಾಖೆಯಿಂದಲೇ ಬಹಳಷ್ಟು ಆದಾಯಗಳಿಸುತ್ತಿವೆ. ಅದರಂತೆ ರಾಜ್ಯ ಸರ್ಕಾರ ಕೂಡ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅದಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿನ ಅನೇಕ ಪ್ರವಾಸಿ ತಾಣಗಳು ಅಳಿವಿನ ಅಂಚಿನಲ್ಲಿವೆ, ಅವುಗಳನ್ನು ಅಭಿವೃದ್ಧಿ ಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಂತೆಯೇ, ಕರ್ನಾಟಕದ ಕಿರೀಟ ಎಂದು ಕರೆಯಲಾಗುವ ಬೀದರ್ ಗೆ ತನ್ನದೆಯಾದ ಸ್ಥಾನಮಾನ, ಇತಿಹಾಸವಿದೆ. ಇಲ್ಲಿನ ಪ್ರವಾಸಿ ತಾಣಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಬೇಕು.

ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಐತಿಹಾಸಿಕ ಸ್ಥಳಗಳಿವೆ. ಇದು ಹೈದ್ರಾಬಾದ್ ಗೂ ಹತ್ತಿರವಾಗುತ್ತದೆ. ಸರ್ಕಾರ ಬೀದರ್ ನಲ್ಲಿನ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೊಳಿಸುವ ಮೂಲಕ ಪ್ರವಾಸಿಗರನ್ನು ಸೆಳೆಯುವ ಕೆಲಸ ಮಾಡಬೇಕು. ಮೈಸೂರಿಗೆ ಕೊಟ್ಟಂತೆ ಬೀದರ್ ಗೂ ಫಿಲಂ ಸಿಟಿಯನ್ನು ಕೊಡಬೇಕು. ಕ್ಷೇತ್ರದಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರವಾಸೋಧ್ಯಮ ಇಲಾಖೆಯಿಂದ 3 ಕೋಟಿ ರೂ. ಅನುದಾನ ನೀಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಏಪ್ರಿಲ್ ತಿಂಗಳಿನಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ಸಮಯ ತೆಗೆದುಕೊಂಡು ಪ್ರವಾಸೋಧ್ಯಮ, ಪುರಾತತ್ವ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿನ ಪ್ರವಾಸೋಧ್ಯಮ ತಾಣಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವುದಾಗಿ ಸಚಿವ ಸಿ.ಪಿ ಯೋಗೇಶ್ವರವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version