ಪತ್ರಕರ್ತರ ಹಿತ ಕಾಯಲು ಸರಕಾರ ಬದ್ಧ _ಮುಖ್ಯಮಂತ್ರಿ ಬೊಮ್ಮಾಯಿ

ಪತ್ರಕರ್ತರ ಹಿತ ಕಾಯಲು ಸರಕಾರ ಬದ್ಧ _ಮುಖ್ಯಮಂತ್ರಿ ಬೊಮ್ಮಾಯಿ

ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು.

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದ ಮನವಿ ಮೇರೆಗೆ ಇದರ ನವೀಕರಣಕ್ಕೆ 18 ಲಕ್ಷ ರೂ. ಅನುದಾನವನ್ನು ನೀಡಿರುವುದಾಗಿ ತಿಳಿಸಿದರು.

 

 

ನಗರ ಮತ್ತು ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಹಿತ ಕಾಯಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪತ್ರಿಕಾಏಜೆಂಟರೇ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತ್ರಿಕೆಗಳನ್ನು ವಿತರಿಸಿ ಜೀವನ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಅನೇಕ ಪತ್ರಕರ್ತರು ಇದನ್ನೇ ನಂಬಿಕೊಂಡು ಹತ್ತಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದಾರೆ. ನಗರ ಹಾಗೂ ಗ್ರಾಮೀಣ ಪತ್ರಕರ್ತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು.

ಪತ್ರಕರ್ತರಿಗೆ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಹಾಗೂ ಆರೋಗ್ಯ ವಿಮೆ, ಉಚಿತ ಹೆಲ್ತ್ ಕಾರ್ಡ್, ಉಚಿತ ಬಸ್ ಪಾಸ್ ಸೌಲಭ್ಯ, ತಾಲ್ಲೂಕು ಮಟ್ಟದಲ್ಲಿ ಪತ್ರಿಕಾ ಭವನ ನಿರ್ಮಾಣ, ಜಿಲ್ಲಾ ಮಟ್ಟದಲ್ಲಿ ಪತ್ರಕರ್ತರಿಗೆ ವಿಶೇಷ ತರಬೇತಿಗೆ ಆದ್ಯತೆ ನೀಡುವುದು, ಪತ್ರಕರ್ತರಿಗೆ ಉಚಿತ ನಿವೇಶನ ನೀಡುವುದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ನೀತಿಯನ್ನು ಸರಳೀಕರಣಗೊಳಿಸುವುದು ಹಾಗೂ ಪತ್ರಕರ್ತರ ವಾಹನಗಳಿಗೆ ಉಚಿತ ಟೋಲ್ ಫೀ ಮಾಡುವುದು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿರಿಯ ಪತ್ರಿಕಾ ಸಂಪಾದಕರಾದ ಜೀಲ್ ಪತ್ರಿಕೆ ಸಂಪಾದಕರಾದ ರುದ್ರಯ್ಯ, ಅಮೃತವಾಣಿ ಪತ್ರಿಕೆ ಸಂಪಾದಕರಾದ ಗಂಗಹನುಮಯ್ಯ, ಕಮಲಾ ಗಂಗಹನುಮಯ್ಯ, ಸೊಗ ಪತಿಕೆಯ ಎಸ್.ಶಿವಣ ಪಜಾಪಗತಿ ಪತಿಕೆಯ ಪರವಾಗಿ

ಮಧುಕರ್, ಏಕೇಶ್ ಪತ್ರಿಕೆಯ ಪರವಾಗಿ ಟಿ.ಇ.ರಘುರಾಂ ಹಾಗೂ ಪುರುಷೋತ್ತಮ್ ಮೊದಲಿಯಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವರು ಹಾಗೂ ಸೊಗಡು ಪತ್ರಿಕೆ ಸಂಪಾದಕ ಎಸ್.ಶಿವಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಮುಂದೆಯೂ ಇದೇ ರೀತಿ ಉತ್ತಮವಾಗಿ ಕೆಲಸ ನಿರ್ವಹಿಸಿ ಎಂದು ಶುಭ ಹಾರೈಸಿದರು.

 

ಅಮೃತವಾಣಿ ಪತ್ರಿಕೆ ಸಂಪಾದಕರು ಹಾಗೂ ಮಾಜಿ ಶಾಸಕರಾದ ಗಂಗಹನುಮಯ್ಯ ಮಾತನಾಡಿ, ನಮ್ಮ ಕಾಲದಲ್ಲಿ ಮೊಳೆ ಜೋಡಿಸಿ ಪತ್ರಿಕೆ ಪ್ರಿಂಟ್ ಮಾಡಲಾಗುತ್ತಿತ್ತು. ಇಂದಿನ ಕಾಲಘಟ್ಟದಲ್ಲಿ ತಂತ್ರಜ್ಞಾನವೂ ಬದಲಾಗಿ ಅತ್ಯಂತ ವೇಗವಾಗಿ ಓದುಗರಿಗೆ ಪತ್ರಿಕೆ ತಲುಪುತ್ತಿರುವುದು ಅತ್ಯಂತ ಸಂತೋಷದಾಯಕ ಎಂದರು.

 

ಪ್ರಜಾಪ್ರಗತಿ ಪತ್ರಿಕೆಯ ಮಧುಕರ್‌ ಮಾತನಾಡಿ, ನಾವೆಲ್ಲಾ ಒಂದಾಗಿ ಪತ್ರಕರ್ತರ ಹಿತ ಕಾಪಾಡಲು ಮುಂದಾಗಬೇಕು, ಒಗ್ಗಟ್ಟಿನಲ್ಲಿ ಬಲವಿದೆ ಎಂಬುದು ಈ ಕಾರ್ಯಕ್ರಮದಿಂದ ಸಾಬೀತಾಗಿದೆ. ನವೀಕರಣ ಕಾಮಗಾರಿ ಆದಷ್ಟು ಬೇಗ ಮುಗಿದು ಪತ್ರಕರ್ತರಿಗೆ ಅನುಕೂಲವಾಗಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ಸಂಸದ ಜಿ.ಎಸ್. ಬಸವರಾಜು, ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಾ.ಸಿ.ಎಂ.ರಾಜೇಶ್‌ಗೌಡ, ಚಿದಾನಂದ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಉಪಾಧ್ಯಕ್ಷರಾದ ತಿಪಟ ಕೃಷ್ಣ, ಎಲ್. ಚಿಕ್ಕೀರಪ್ಪ, ಶ್ಯಾ.ನ.ಪ್ರಸನ್ನಮೂರ್ತಿ, ಕಾರ್ಯದರ್ಶಿಗಳಾದ ಹಾರೋಗೆರೆ ಸತೀಶ್, ದಶರಥ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಲಿಂಗಸ್ವಾಮಿ, ಖಜಾಂಚಿ ದೇವಪ್ರಕಾಶ್ ಸೇರಿದಂತೆ ಸಂಘದ ಎಲ್ಲಾ ಸದಸ್ಯರು, ಪತ್ರಕರ್ತರು, ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version